Wednesday, April 24, 2024

ಎರಡು ಹನಿ

ಕಾದು ಕಾದು ಕಾಯುತ್ತಿದ್ದ
ಮಳೆಯು ಬಂದೇಬಿಟ್ಟಿತು
ಹೊರಗೆ ಇಣುಕಿ ಹರುಷದಿಂದ
ಮನಸು ಕುಣಿದುಬಿಟ್ಟಿತು

ತಂತಿ ಮೇಲೆ ಇರುವ ಬಟ್ಟೆ
ಬೇಗ ತನ್ನಿ ಅಂದಳು
ಒಣಗಲಿಟ್ಟ ಹಪ್ಪಳಗಳ
ತಾನೆ ಓಡಿ ತಂದಳು

ಓಡಿ ಓಡಿ ಮಹಿಡಿ ಹತ್ತಿ
ಬಟ್ಟೆ ತರಲು ಹೊರಟೆನು
ಮಳೆಯ ಹನಿಯ ತಂಪಿಗೆ
ಮೈಯ ಒಡ್ಡಿ ನಿಂತೆನು

ನೆನೆಯಬೇಡಿ ಮೊದಲ ಮಳೆಯು
ರೋಗ ರುಜಿನ ತರುವುದು
ಕೂಗಿ ಕರೆದಳೆನ್ನ ಮಡದಿ
ಬೇಗ ಮರಳಿ ಬಂದೆನು

ಅಯ್ಯೋ ದೇವ ಎರಡೆ ಹನಿಯು
ಪಲ್ಸ್ ಪೋಲಿಯೊ ಹಾಗೆಯೆ
ಇಳಿದು ಹೋಯ್ತು ಹರುಷವೆಲ್ಲ
ಬಂದ ಹಾಗೆ ಬೇಗನೆ

Monday, March 4, 2024

ಚುಟುಕಗಳು

ಬದಲಾವಣೆ

ಇರಬೇಕು ಸಹನೆ ತಪ್ಪಿಸಲು ಬಲು ಬವಣೆ

ಕರಗಿಸುತ ಕೋಪವನು ಸಹನೆಗೆ ಹಾಕು ಮಣೆ

ಸುರಿಯುವುದು ಎದೆಯಲ್ಲಿ ದಯೆ ಮತ್ತು ಕರುಣೆ

ತರುವುದು ಬದುಕಿನಲಿ ಸುಂದರ ಬದಲಾವಣೆ



Friday, January 19, 2024

ರಾಮಧ್ಯಾನ

ರಾಮ ರಾಮ ರಾಮ ಶ್ರೀ ರಾಮ ರಾಮ ರಾಮ

ರಾಮ ರಾಮ ರಾಮ ಶ್ರೀ ರಾಮ ರಾಮ ರಾಮ


ರಾಮನ ನಾಮವೆ ತಾರಕ ಮಂತ್ರವು

ಕಾಮನೆಗಳನೇ ಸುಡುವಾ ಅನಲ

ತಾಮಸ ಕಾಯಕೆ ಚಲಿಸುವ ಬಲವ

ನಾಮದ ಮಾತ್ರದೆ ನೀಡುವ ಸಬಲ ||


ಮರಮರ ಎನ್ನುವ ರತ್ನಾಕರನಿಗೆ

ವರಗಳ ನೀಡಿದೆ ಕಾವ್ಯವ ರಚಿಸೆ

ಸರಯೂ ತೀರದ ಚೆಲುವಿನ ಪುತ್ತಿಗೆ

ಕರೆದರೆ ಬರುವೆಯ ಎನ್ನನು ಹರಸೆ ||


ಜನರನು ಕಾಡುವ ದೈತ್ಯರ ಕೊಂದವ

ಮನದಲಿ ಎನ್ನಯ ದೋಷವ ಕೊಲ್ಲು

ಹನುಮನ ಹೃದಯದಿ ನಿಂತಿಹೆ ರಾಘವ

ಕನಿಕರ ತೋರೋ ಎದೆಯಲಿ ನಿಲ್ಲು ||


ವಂದಿಪೆ ರಾಮನೆ ನಿನ್ನಯ ಪಾದಕೆ

ಬಂದಿಹೆ ನಮಿಸುತ ಕರುಣೆಯ ಬೇಡಿ

ಚಂದದಿ ಕರೆಯೋ ಆತ್ಮದ ಸನಿಹಕೆ

ಗಂಧದ ಹಾಗೆಯೆ ನನ್ನನು ತೀಡಿ ||


ರಾಮ ರಾಮ ರಾಮ ಶ್ರೀ ರಾಮ ರಾಮ ರಾಮ

ರಾಮ ರಾಮ ರಾಮ ಶ್ರೀ ರಾಮ ರಾಮ ರಾಮ

Tuesday, November 21, 2023

ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತು

ಆರ್ಯವೈಶ್ಯ ಸಾಹಿತ್ಯ ಪರಿಷತ್ತು,

ನಮಗು ಗೊತ್ತು, ನಿಮಗು ಗೊತ್ತು,ಎಲ್ಲರಿಗೂ ಗೊತ್ತು!


ಅಂಬೆಗಾಲ ಇಡುತ್ತಿದ್ದ ಈ ನಿಮ್ಮ ಪೋರ,

ಆಗಿಹನು ಹದಿಹರೆಯದ ಚಿತ್ತ ಚೋರ!

ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಗಮನವ ಸೆಳೆದವ,

ಚಿಗುರು ಮೀಸೆ ತೀಡುತ್ತ ನಗುನಗುತ ನಿಂತಿರುವ!


ಸಾಹಿತ್ಯ ಸಂಸ್ಕೃತಿಗೆ ನಮಿಸಿ ಹೆಜ್ಜೆ ಇಟ್ಟವ,

ಎಲೆಯ ಮರೆಯ ಕಾಯ್ಗಳಿಗೆ ಬೆಳಕನು ಕೊಟ್ಟವ!

ಉದಯಿಸುವ ಪ್ರತಿಭೆಗಳ ಕೈಯ ಹಿಡಿದವ,

ಬೆನ್ನ ತಟ್ಟಿ ಧೈರ್ಯ ತುಂಬಿ ಅಭಯವಿತ್ತವ!


ದಾನಿಗಳ ಕೊಡುಗೆಯಿಂದ ಶಕ್ತಿವಂತನು,

ಅವರ ನೆರವನೆಂದೂ ಮರೆತು ನಡೆಯನು!

ಸದಸ್ಯರು ಕೊಟ್ಟ ಹುರುಪು ರಕ್ಷೆಯಾಯಿತು,

ಕಾರ್ಯಕಾರಿ ಶ್ರಮದಿಂದ ಯಶವು ಬಂದಿತು!


ಸಾಧಿಸಲು ಕಲಿಯುಲು ಇನ್ನೂ ಇದೆ ಬಹಳ,

ಬೆಳೆಯುವನು ಬೆಳೆಸುವನು ದಾರಿ ಮಾಡಿ ಸರಳ!

ಹೀಗೆ ಇರಲಿ ಸದಾ ನಿಮ್ಮ ಪೋಷಿಸುವ ಪಾತ್ರ,

ಆಗುವನು ಜನಾಂಗಕೆ ಕಂಗಳ ನಕ್ಷತ್ರ!

Friday, October 13, 2023

ಹನಿಗವನಗಳು

 ೧. ಸರ್ವಸ್ವ


ಮಗುವಿಗೆ ಮಾತೆಯ ಮಡಿಲೇ ಸರ್ವಸ್ವ

ಪ್ರಿಯತಮೆಗೆ ಪ್ರಿಯನ ಒಲವೇ ಸರ್ವಸ್ವ

ಬುವಿಗೆ ರವಿಚಂದ್ರರ ಬೆಳಕೇ ಸರ್ವಸ್ವ

ಹರಿವ ನದಿಗೆ ಕರೆವ ಕಡಲೇ ಸರ್ವಸ್ವ

ಭಕ್ತನಿಗೆ ಪರಮಾತ್ಮನ ಪಾದವೇ ಸರ್ವಸ್ವ

ಇಂದಿನ ಜನಕೆ ಚತುರವಾಣೀಯೇ ಸರ್ವಸ್ವ!

Sunday, October 1, 2023

ದೀಪಾವಳಿ

ಕಾಣುತಿಹುದು ದೀಪ ಮಾಲೆ,

ಬೀದಿಯಲ್ಲಿ ಸಾಲು ಸಾಲೆ.

ಬೆಳಕ ಬೀರಿ ನಗುವ ಚಿಮ್ಮಿದೆ,

ದೀಪಾವಳಿಯ ಹುರುಪು ತಂದಿದೆ.


ಗಂಗಾ ಮಾತೆಯೆ ಶರಣು ಶರಣು

ನೀರ ತುಂಬುವೆ ಇಂದು ನಾನು

ಶುದ್ಧವಾಗಲಿ ಮಲಿನ ತನುವು

ಹಗುರವಾಗಲಿ ನೊಂದ ಮನವು


ಕೃಷ್ಣ ದೇವನೆ ನಿನಗೆ ನಮನ

ಆಗಲಿಂದೇ ಅಸುರ ದಮನ

ನರಕ ಚತುರ್ದಶಿ ಶುಭದಿನ

ನರಕಾಸುರರಿಗೆ ಕೊನೆ ದಿನ


ಕೇಳುತಿಹುದು ಗೆಜ್ಜ ನಾದ,

ನೋಡು ಅಲ್ಲಿ ದಿವ್ಯ ಪಾದ,

ಬಂದಳಗೋ ಲಕುಮಿ ತಾಯಿ,

ಸಲಹು ಎಮ್ಮನು ನೀನು ಮಾಯಿ.


ಬಕುತಿ ಭಾವಗಳು ಚಿಮ್ಮಿ ಓಕುಳಿ

ಹರುಷದಾ ದೀಪಾವಳಿ

ದೀಪಗಳ  ಸಿರಿ ಬೆಳಕಲಿ

ವಿಶ್ವ ಶಾಂತಿಯು ಹರಡಲಿ


ಬೆಳಕಿನ ಎರವಲು

ನೀಡಿ ಬೆಳಕಿನ ಎರವಲು

ದೀಪವಾಗಿಸು ಎನ್ನನು.

ದೀಪಾವಳಿಗಳ ಮಾಲೆಯಲ್ಲಿ,

ಚೆಂದ ಪೋಣಿಸು ಎನ್ನನು.


ಜಗಕೆ ಮಿಣುಕು ಬೆಳಕನಿತ್ತು

ಕುಣಿವೆ ನಿನ್ನ ಹೆಸರಲಿ.

ಕೆರಯ ನೀರನು ಕೆರೆಗ ಚೆಲ್ಲಿದ,

ಧನ್ಯ ಭಾವವು  ನನ್ನದಿರಲಿ.


ಮನದ ತಮವು ಕರಗಲಿ,

ಜಡತೆ ಮಾಯವಾಗಲಿ.

ಜಗದ ನೋವು ನೀಗಲಿ,

ಹೊಸ ಬೆಳಕಿನಾ ಬೆಳಕಲಿ.