Friday, July 29, 2022

ಮುಕ್ತಕಗಳು - ೨೮

ಗುರುವಾದ ಶಕುನಿ ತಾ ಗಾಂಧಾರಿ ಪುತ್ರನಿಗೆ

ಹರಿಯೆ ಗುರುವೆಂದ ಬಕುತಿಯಲಿ ಅರ್ಜುನನು |

ಗುರುತರವು ಗುರುಪಾದವನರಸುವ ಕಾರ್ಯವದು

ಸರಿಗುರುವು ಕೈವಲ್ಯ ಪರಮಾತ್ಮನೆ ||೧೩೬||


ಅನ್ನವನು ಉಣ್ಣುತಿರೆ ಅನ್ನದಾತನ ನೆನೆಸು

ನಿನ್ನ ಭೂಮಿಗೆ ತಂದ ಜನ್ಮದಾತರನು |

ತನ್ನಾತ್ಮದೊಂದು ಭಾಗವನಿತ್ತವನ ನೆನೆಸು

ಉನ್ನತಿಗೆ ಮಾರ್ಗವದು ಪರಮಾತ್ಮನೆ ||೧೩೭||


ಮೊಳೆತು ಮರವಾಗಲಿಕೆ ತಂತ್ರಾಂಶ ಬೀಜದಲಿ

ಬೆಳೆದು ಮಗುವಾಗೊ ತಂತ್ರ ಭ್ರೂಣದಲ್ಲಿ |

ಕೊಳೆತು ಮಣ್ಣಲಿ ಕಲೆವ ಸೂತ್ರ ನಿರ್ಜೀವದಲಿ

ಅಳೆದು ಇಟ್ಟವರಾರು ಪರಮಾತ್ಮನೆ ||೧೩೮||


ಬೇಡು ದೇವರನು ನಿನಗಾಗಿ ಅಲ್ಲದೆ, ಪರರ

ಕಾಡುತಿಹ ನೋವುಗಳ ಕೊನೆಗಾಣಿಸಲಿಕೆ |

ಓಡಿ ಬರುವನು ದೇವ ನಿಸ್ವಾರ್ಥ ಕೋರಿಕೆಗೆ

ತೀಡುವನು ನಿನ ಕರುಮ ಪರಮಾತ್ಮನೆ ||೧೩೯||


ದೇವರೆಂದರೆ ಕಾವ ದೊರೆ, ಕೋರಿಕೆಗೆ ಪಿತನೆ?

ಜೀವಸಖ, ಅರಿವ ಕೊಡುವಂಥ ಗುರುವೇನು? |

ಜೀವಿಯೊಳಿರುವ ಆತ್ಮ, ಸರ್ವಶ ಕ್ತನೆ, ಯಾರು?

ನಾವು ಭಾವಿಸಿದಂತೆ ಪರಮಾತ್ಮನೆ ||೧೪೦||

No comments: