Monday, July 11, 2022

ಮುಕ್ತಕಗಳು - ೨೬

ಹದ್ದಿರದ  ಹಯಗಳೊಲು ಪಂಚೇಂದ್ರಿ ಯಗಳಿರಲು

ಬಿದ್ದಿಹುದು ಕಡಿವಾಣ ಮನವೆಂಬ ಹಿಡಿತ |

ಬುದ್ಧಿಯೇ ಕಡಿವಾಣ ಹಿಡಿದೊಡೆಯನಲ್ಲವೇ

ಬುದ್ಧಿಗಿಷ್ಟರಿವ ತಾ ಪರಮಾತ್ಮನೆ  ||೧೨೬||


ಅನುದಿನವು ಸಿಗುತಿಹುದು ಹೊಸದೊಂದು ದಿನವೆಮಗೆ

ಚಣಚಣವು ಕರಗುತಿದೆ ದಕ್ಕಿರುವ ದಿನವು |

ಕನಸಿನಲಿ ಕಳೆಯದೆಲೆ ಅತಿಮುಖ್ಯ ಚಣಗಳನು

ಇನಿತಿನಿತು ಕಲಿಯೋಣ ಪರಮಾತ್ಮನೆ ||೧೨೭||


ಸೇವೆಯನು ಮಾಡುತ್ತ ದಾದಿಯರು ಬೆಂದಿಹರು

ಸಾವುನೋವುಗಳ ದಿನನಿತ್ಯ ನೋಡುತಲಿ |

ಜೀವಕ್ಕೆ ಸೋದರಿಯು ವೈದ್ಯರಿಗೆ ಬಲದಕೈ

ನೋವಿರದಿರಲವರಿಗೆ ಪರಮಾತ್ಮನೆ ||೧೨೮||


ಕರಿನೆರಳ ಮುಷ್ಟಿಯಲಿ ನಮ್ಮ ಭೂಲೋಕವಿರೆ

ಬಿರುಗಾಳಿ ಬೀಸಿ ದೇಹಗಳು ಧರೆಗುರುಳೆ

ಗಿರಿಧರನ ಕರುಣೆಯೇ ರಕ್ಷಣೆಗೆ ಸಾಧನವು

ಮೊರೆಯಿಡುವೆ ಕಾಪಾಡು ಪರಮಾತ್ಮನೆ ||೧೨೯||


ಉಕ್ಕಿ ಬಂದರೆ ಕೋಪ ಹಿತಬಯಸುವವರಲ್ಲಿ

ಸೊಕ್ಕು ತೋರದೆ ಬಾಯಿಮುಚ್ಚೆರಡು ಘಳಿಗೆ |

ಸಿಕ್ಕಿ ಬೀಳದಿರು ನೀ ತಾಮಸದ ಬಲೆಯಲ್ಲಿ

ನಕ್ಕುಬಿಡು ಗೆದ್ದೆ ನೀ ಪರಮಾತ್ಮನೆ ||೧೩೦||

No comments: